ಬುಧವಾರ, ಸೆಪ್ಟೆಂಬರ್ 10, 2025

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಠೇವಣಿ ಸಿಗುತ್ತೋ ಇಲ್ವೋ ಗೊತ್ತಿಲ್ಲ ‌: ಮುನ್ನೆಲೆಗೆ ಬರಲು ಅಪಪ್ರಚಾರ



    ಭದ್ರಾವತಿ : ನನ್ನ ಮಾತುಗಳಿಂದ ಕ್ಷೇತ್ರದಲ್ಲಿ ಯಾವುದೇ ಧರ್ಮಕ್ಕೆ, ಜಾತಿಗೆ, ಯಾರಿಗೂ ನೋವಾಗಿಲ್ಲ. ಯಾವುದೇ ರೀತಿ ಗೊಂದಲವಿಲ್ಲ, ಸಂಘರ್ಷವಿಲ್ಲ. ಇದು ಕೇವಲ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಗಲಾಟೆ ಅಷ್ಟೆ. ಕ್ಷೇತ್ರದ ಜನರು ಇಂತಹ ಕುತಂತ್ರಗಳಿಗೆ ಕಿವಿಗೊಡುವುದಿಲ್ಲ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದ್ದಾರೆ. 
    ಕ್ಷೇತ್ರದಲ್ಲಿ ಸರ್ವ ಧರ್ಮಿಯರು ಸುಖ, ಶಾಂತಿ ನೆಮ್ಮದಿಯಿಂದ  ಬದುಕುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನವರು ಅನಾವಶ್ಯಕವಾಗಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ಯಾರೂ ಸಹ ಇವರ ಅಪಪ್ರಚಾರಕ್ಕೆ  ಕಿವಿಗೊಡುವುದಿಲ್ಲ. ನಾನು ಗೆಲ್ಲಲು ಪ್ರಮುಖವಾಗಿ ಮುಸಲ್ಮಾನರು ಸೇರಿದಂತೆ ಎಲ್ಲಾ ಧರ್ಮದವರು ಕಾರಣರಾಗಿದ್ದಾರೆ ಎಂದರು.
   ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಠೇವಣಿ ಸಿಗುತ್ತೋ ಇಲ್ವೋ ಗೊತ್ತಿಲ್ಲ ‌. ಹಾಗಾಗಿ ಈ ರೀತಿ ಮುನ್ನೆಲೆಗೆ ಬರಲು ಕಾರಣರಾಗಿದ್ದಾರೆಂದು ದೂರಿದರು. 

ನಾನು ಸರ್ವಧರ್ಮಗಳನ್ನು ಪ್ರೀತಿಸುವ ವ್ಯಕ್ತಿ, ನನ್ನ ವಿರುದ್ಧ ಅಪಪ್ರಚಾರ : ಸಂಗಮೇಶ್ವರ್

ಬಿ.ಕೆ ಸಂಗಮೇಶ್ವರ್ 
    ಭದ್ರಾವತಿ : ನಾನು ಸರ್ವಧರ್ಮಗಳನ್ನು ಪ್ರೀತಿಸುವ ವ್ಯಕ್ತಿ. ಕ್ಷೇತ್ರದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಹಲವಾರು ವರ್ಷಗಳಿಂದ ಎಲ್ಲಾ ಧರ್ಮದ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಸೋಮವಾರ ನಗರದಲ್ಲಿ ನಡೆದ ಈದ್ ಮೆರವಣಿಗೆ ಸಂದರ್ಭದಲ್ಲಿ ನಾನು ಮಾತನಾಡಿರುವುದನ್ನು ಪೂರ್ಣವಾಗಿ ಪ್ರಸಾರ ಮಾಡದೆ ಕೆಲವರು ಅದನ್ನು ತಿರುಚಿ ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 
       ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕ್ಷೇತ್ರದಲ್ಲಿ ಹಿಂದೂ-ಮುಸ್ಲಿಂ ಹಾಗು ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟುಮಾಡುವ ನೀಚ ಬುದ್ದಿಯ ಬಿಜೆಪಿ, ಜೆಡಿಎಸ್‌ನವರ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ. 
    ಪ್ರತಿಯೊಂದು ಧರ್ಮದಲ್ಲಿನ ಆಚರಣೆ, ಸಂಪ್ರದಾಯಗಳನ್ನು ಕಂಡಾಗ ಆ ಆಚರಣೆಗಳನ್ನು, ಆ ಸಂಪ್ರದಾಯಗಳನ್ನು ಅನುಭವಿಸಬೇಕೆಂಬ ಇಚ್ಛೆಯನ್ನು ವ್ಯಕ್ತಪಡಿಸುತ್ತೇನೆ. ಎಲ್ಲಾ ಧರ್ಮಗಳಲ್ಲೂ ಹುಟ್ಟಬೇಕೆಂದು ಹೇಳುವುದು ಸಹಜ. ಇದೆ ರೀತಿ ಮುಸ್ಲಿಂ ಧರ್ಮದಲ್ಲಿ ಹುಟ್ಟಬೇಕೆಂದು ಹೇಳಿರುವುದು ನಿಜ. ಆದರೆ ನಾನು ಮಾತನಾಡಿರುವುದನ್ನು ಪೂರ್ಣವಾಗಿ ಪ್ರಸಾರ ಮಾಡದೆ ಕೆಲವರು ನನ್ನ ಮಾತುಗಳನ್ನು ತಿರುಚಿದ್ದಾರೆ. 
    ನಾನು ಮಾತನಾಡಿದ ಸಂದರ್ಭದಲ್ಲಿ ಇತರೆ ಧರ್ಮದವರು ಸಹ ಇದ್ದರು. ಹಿಂದೂ, ಮುಸ್ಲಿಂ, ಕ್ರೈಸ್ತರು, ದಲಿತರು, ಬೌದ್ಧರಾಗಿ ಹುಟ್ಟಬೇಕೆಂದು ಸಹ ಹೇಳಿದ್ದೇನೆ. ಕೆಲವು ಕೇಡಿಗೇಡಿಗಳು ನಾನು ಮಾತನಾಡಿರುವುದನ್ನು ತಿರುಚಿ ಧರ್ಮಧರ್ಮಗಳ ನಡುವೆ ವಿಷ ಬೀಜವನ್ನು ಬಿತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಸಫಲವಾಗುವುದಿಲ್ಲ ಎಂದರು. 
    ಕ್ಷೇತ್ರದ ನನ್ನ ಮತದಾರ ದೇವರುಗಳ ಆಶಿರ್ವಾದ ಇರುವವರೆಗೂ ಯಾರು ಸಹ ನನಗೆ ಏನು ಮಾಡಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ನಾನು ಕೈಗೊಳ್ಳುತ್ತಿರುವ ಒಳ್ಳೆಯ ಕಾರ್ಯಗಳನ್ನು ಜನರಿಗೆ ತಿಳಿಸದೆ, ನನ್ನ ಜನ ಬೆಂಬಲವನ್ನು ಸಹಿಸದೇ ಈ ರೀತಿ ಅಪಪ್ರಚಾರ ಮಾಡುವುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಕಾಯಕವಾಗಿದೆ ಎಂದು ದೂರಿದರು. 

ದೇಶ ದ್ರೋಹಿಗಳನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ವಿಧಿಸಿ

ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹ 

ಬಿ.ಆರ್ ಗಿರೀಶ್ 
    ಭದ್ರಾವತಿ: ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು `ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಪ್ಪಿತಸ್ಥರನ್ನು ತಕ್ಷಣ ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹಿಸಿದ್ದಾರೆ.
    ನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಎಲ್ಲಾ ಹಬ್ಬ-ಹರಿದಿನಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೂ ಕೆಲವು ಕಿಡಿಗೇಡಿಗಳು ಆಶಾಂತಿ ವಾತಾವರಣ ಉಂಟು ಮಾಡುವ ಮೂಲಕ ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ. 
    ಹಿಂದೂ ಧರ್ಮ, ಸಂಸೃತಿಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕೇಸರಿಪಡೆ ಯಾವುದೇ ಕಾರಣಕ್ಕೂ ಈ ರೀತಿಯ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. `ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿರುವುದು ಅಕ್ಷಮ್ಯ ಅಪರಾಧಿ ಕೃತ್ಯವಾಗಿದ್ದು, ತಕ್ಷಣ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಚರಂಡಿ ಸ್ವಚ್ಛಗೊಳಿಸುವಾಗ ಬಾರಿ ಗಾತ್ರದ ಹೆಬ್ಬಾವು ಪತ್ತೆ

ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಸುಮಾರು ೬ ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದ್ದು, ಇದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ. 
    ಭದ್ರಾವತಿ : ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಸುಮಾರು ೬ ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದ್ದು, ಇದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ನಡೆದಿದೆ. 
    ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಸ್ಥಳೀಯ ನಿವಾಸಿ ಟಿ.ಡಿ ಶಶಿಕುಮಾರ್‌ರವರು ಪಂಚಾಯಿತಿ ವಾರ್ಡ್ ವ್ಯಾಪ್ತಿಯ ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ತಕ್ಷಣ ಹಾವು ರಕ್ಷಕರಿಗೆ ಮಾಹಿತಿ ನೀಡಿದ್ದು, ಹಾವನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. 
    ಈ ಕುರಿತು ಮಾಹಿತಿ ನೀಡಿರುವ ಶಶಿಕುಮಾರ್‌ರವರು ಹೆಬ್ಬಾವು ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಾರ್ಡ್‌ಗಳಲ್ಲಿ  ಚರಂಡಿಗಳು ಸದಾ ಸ್ವಚ್ಛತೆಯಿಂದ ಕೂಡಿರಬೇಕು. ಇಲ್ಲವಾದಲ್ಲಿ ರೋಗರುಜಿನಗಳ ಜೊತೆಗೆ ಅಪಾಯಕಾರಿ ಜೀವಿಗಳ ಆಶ್ರಯ ತಾಣಗಳಾಗಿ ಮಾರ್ಪಡಲಿವೆ ಎಂದು ನಿವಾಸಿಗಳಿಗೆ ಎಚ್ಚರಿಸಿದ್ದಾರೆ. 

ಅನುದಾನಿತ ಶಾಲೆಗಳ ವಲಯ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಬಾಲಕ, ಬಾಲಕಿಯರ ಕ್ರೀಡಾಕೂಟ

೧೫ ಶಾಲೆಗಳ ಒಟ್ಟು ೫೦೦ಕ್ಕೂ ಅಧಿಕ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆ

ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ಅನುದಾನಿತ ಶಾಲೆಗಳ ವಲಯ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಬಾಲಕ, ಬಾಲಕಿಯರ ಕ್ರೀಡಾಕೂಟ ಏರ್ಪಡಿಸಲಾಯಿತು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ:  ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ಅನುದಾನಿತ ಶಾಲೆಗಳ ವಲಯ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಬಾಲಕ, ಬಾಲಕಿಯರ ಕ್ರೀಡಾಕೂಟ ಏರ್ಪಡಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕ್ರೀಡಾಕೂಟ ಉದ್ಘಾಟಿಸಿದರು. ಲ್ಲಿ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕಿ ಸಿಸ್ಟರ್ ಎಲಿಜಬೆತ್ ಫರ್ನಾಂಡಿಸ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಸುಮಾರು ೧೫ ಶಾಲೆಗಳ ಒಟ್ಟು ೫೦೦ಕ್ಕೂ ಅಧಿಕ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿಗಳನ್ನು ಪಡೆದುಕೊಂಡರು. 
  ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿಯ ಷಡಾಕ್ಷರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜನಾಯ್ಕ, ಅನುದಾನಿತ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ್, ತಾಲೂಕು ಟಿ.ಪಿ.ಓ ಮಂಜೀರ ಕೌಸರ್, ಸೈಂಟ್ ಚಾರ್ಲ್ಸ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮಾರ್ಗರೀಟ್ ಡಿಸಿಲ್ವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ರೀಡಾಕೂಟ ಯಶಸ್ವಿಗೊಳಿಸಲು ಸಹಕರಿಸಿದ ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗು ತಾಲೂಕಿನ ಎಲ್ಲಾ ಅನುದಾನಿತ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಕಾರಿ ಎ.ಕೆ ನಾಗೇಂದ್ರಪ್ಪ ಕೃತಜ್ಞತೆ ಸಲ್ಲಿಸಿದ್ದು, ಅಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಲ್ಲಾ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. 

ಮಂಗಳವಾರ, ಸೆಪ್ಟೆಂಬರ್ 9, 2025

ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಡಿಯೋ ವೈರಲ್ : ಪ್ರಕರಣ ದಾಖಲು

ಶಾಸಕ ಸಂಗಮೇಶ್ವರ್ ಮುಸ್ಲಿಂ ಓಲೈಕೆ ರಾಜಕಾರಣಕ್ಕೆ ಆಕ್ರೋಶ 

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ತಕ್ಷಣ ಇವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ  ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗು ಇನ್ನಿತರರು ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಜೊತೆಗೆ ಭಾರತ್ ಮಾತಾಕೀ ಜೈ ಘೋಷಣೆಗಳನ್ನು ಕೂಗಿದರು.  
    ಭದ್ರಾವತಿ: ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ವಿಡಿಯೋ ಮಂಗಳವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  
    ರಾತ್ರಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿ ಸಾಗಿದ ಈದ್ ಮಿಲಾದ್ ಮೆರವಣಿಗೆ ಮಹಾತ್ಮಗಾಂಧಿ ವೃತ್ತದ ಬಳಿ ತಲುಪಿದಾಗ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಸುಮಾರು ೧೨ ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ನೈಜತೆ ಕುರಿತು ಪೊಲೀಸರು ಎಎಫ್‌ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್‌ರವರು ತನಿಖೆಗೆ ಮೂವರು ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. 
    ಫ್ಲೆಕ್ಸ್ ತೆರವುಗೊಳಿಸಿ, ಅನಧಿಕೃತ ವಿದ್ಯುತ್ ಸಂಪರ್ಕಕ್ಕೆ ಪ್ರಕರಣ ದಾಖಲಿಸಿ: 
    ಈ ನಡುವೆ ಘಟನೆ ಸಂಬಂಧ ಹಿಂದೂಪರ ಸಂಘಟನೆಗಳ ಹಾಗೂ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯಾತೀತ ಜನತಾದಳ ಪಕ್ಷಗಳ ಪ್ರಮುಖರು, ಅಭಿಮಾನಿಗಳು, ದೇಶ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದೆಲ್ಲೆಡೆ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ ಹಾಗು ಬಂಟಿಂಗ್ಸ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ನಗರಸಭೆ ಆಡಳಿತಕ್ಕೆ ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಕೆ.ಎನ್ ಹೇಮಂತ್ ರಾತ್ರಿಯೊಳಗೆ ತೆರವುಗೊಳಿಸುವುದಾಗಿ ಭರವಸೆ ನೀಡಿದರು. 
ಈ ನಡುವೆ ನಗರದೆಲ್ಲೆಡೆ ಈದ್ ಮಿಲಾದ್ ಹಬ್ಬಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದು ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು, ಇದರ ವಿರುದ್ಧ ಮೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಹಿನ್ನಲೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬೀರಪ್ಪ ವಿದ್ಯುತ್ ದೀಪಗಳನ್ನು ತೆರವುಗೊಳಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ  ನೀಡಿದರು. 

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸೋಮವಾರ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು. 
    `ಮುಂದಿನ ಜನ್ಮದಲ್ಲಿ ಮುಸಲ್ಮಾನಾಗಿ ಹುಟ್ಟುವ ಆಸೆ' ಹೇಳಿಕೆಗೆ ಎಲ್ಲೆಡೆ ಆಕ್ರೋಶ : 
    ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸೋಮವಾರ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, `ಮುಂದಿನ ಜನ್ಮದಲ್ಲಿ ಮುಸಲ್ಮಾನಾಗಿ ಹುಟ್ಟುವ ಆಸೆ ಇದೆ. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ನನ್ನ ಮೇಲೆ ಹೊಂದಿರುವ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿದ್ದೇನೆ. ಕಳೆದ ಸುಮಾರು ೨೦ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಮೆರವಣಿಗೆಯನ್ನು ಅಂದಿನ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್‌ರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪುನಃ ಆರಂಭಸಿದ್ದು, ಅಂದಿನಿಂದ ಇಂದಿನವರೆಗೂ ಶಾಂತಿ ಸೌಹಾರ್ತೆಯಿಂದ ಆಚರಿಸಿಕೊಂಡು ಬರುವ ಮೂಲಕ ನನಗೆ ಗೌರವ ತಂದುಕೊಡುವಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚು ಶ್ರಮವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಹೇಳಿಕೆ ನೀಡಿದ್ದರು. ಇದೀಗ ಇವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 
    ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಸೇರಿದಂತೆ ಇನ್ನಿತರ ಪ್ರಮುಖರು, ವಿವಿಧ ಸಂಘಟನೆಗಳು ಸಂಗಮೇಶ್ವರ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಸಮುದಾಯದವರ ಓಲೈಕೆ ರಾಜಕಾರಣ ಕೈಬಿಡುವಂತೆ ಆಗ್ರಹಿಸಿದ್ದಾರೆ. 

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನಪರ ಘೋಷಣೆ ಆರೋಪ

ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ 

ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ಭದ್ರಾವತಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ: ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಹಿಂದೂಪರ ಸಂಘಟನೆಗಳ ಹಾಗೂ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯಾತೀತ ಜನತಾದಳ ಪಕ್ಷಗಳ ಪ್ರಮುಖರು, ಅಭಿಮಾನಿಗಳು ರಾಷ್ಟ್ರ ಧ್ವಜ ಹಿಡಿದು ರಾಷ್ಟ್ರಾಭಿಮಾನ ಪ್ರದರ್ಶಿಸುವ ಮೂಲಕ ಘಟನೆಯನ್ನು ಖಂಡಿಸಿದರು. ಅಲ್ಲದೆ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು. 
    ಈ ನಡುವೆ ಪ್ರಮುಖರು ಮಾತನಾಡಿ, ಭದ್ರಾವತಿಯಂತಹ ನಗರದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಭಾರತೀಯರಾದ ನಮಗೆ ನೋವುಂಟು ಮಾಡುತ್ತದೆ. ದೇಶದ್ರೋಹ ಕೃತ್ಯ ಯಾರೇ ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಭದ್ರಾವತಿ ನಗರ ಮಿನಿ ಪಾಕಿಸ್ತಾನ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ತಕ್ಷಣ ಇಂತಹ ಕೃತ್ಯಗಳಿಗೆ ಪೊಲೀಸರು ಕಡಿವಾಣ ಹಾಕಬೇಕು. ನಿಮ್ಮಿಂದ ಮಾಡಲು ಸಾಧ್ಯವಾಗತ್ತಿದ್ದಲ್ಲಿ ನಾವೇ ಮಾಡಿ ತೋರಿಸಿದ್ದೇವೆ ಎಂದು ಎಚ್ಚರಿಸಿದರು.
    ಈದ್ ಮಿಲಾದ್ ಮೆರವಣಿಗೆಯಲ್ಲಿ ಯಾರೋ ಕಿಡಿಗೇಡಿಗಳು ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದರೂ ಸಹ ಉಳಿದವರು ಮೌನವಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸರು ಆ ಕ್ಷಣವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈ ಕೃತ್ಯವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. 


    ಮಾಧವಚಾರ್ ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಂತಿಮವಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಲಾಯಿತು. ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಹರಸಹಾಸ ಪಡುವಂತಾಯಿತು. 
    ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ತಾಲೂಕು ಮಂಡಲ ನಗರ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಪ್ರಮುಖ್ ಹಾ. ರಾಮಪ್ಪ, ಜೆಡಿಎಸ್ ನಗರ ಅಧ್ಯಕ್ಷ ಆರ್ ಕರುಣಾಮೂರ್ತಿ, ಬಿ.ಜಿ ರಾಮಲಿಂಗಯ್ಯ, ಎನ್. ವಿಶ್ವನಾಥರಾವ್, ಎಂ. ಮಂಜುನಾಥ್, ಡಿ.ಆರ್ ಶಿವಕುಮಾರ್, ರಾಜಶೇಖರ್ ಉಪ್ಪಾರ, ಕೃಷ್ಣ ಛಲವಾದಿ, ಜಿ. ಆನಂದ್ ಕುಮಾರ್, ಯೋಗೇಶ್‌ಕುಮಾರ್, ದುಗ್ಗೇಶ್ ತೇಲ್ಕರ್, ಹನುಮಂತನಾಯ್ಕ, ಧುನಷ್ ಬೋಸ್ಲೆ, ಕಾ.ರಾ ನಾಗರಾಜ್, ಮಹಿಳಾ ಪ್ರಮುಖರಾದ ಸರಸ್ವತಿ, ಅನ್ನಪೂರ್ಣ, ಶಕುಂತಲ, ಲತಾ ಪ್ರಭಾಕರ್, ಆಶಾ ಪುಟ್ಟಸ್ವಾಮಿ, ಕವಿತರಾವ್, ಸುಲೋಚನಾ ಪ್ರಕಾಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.