ಗ್ರಾಮ ಸಭೆಗಳು ಸಮರ್ಪಕವಾಗಿ ನಡೆದು ಅರ್ಹರಿಗೆ ಸರ್ಕಾರಿ ಸೌಲಭ್ಯಗಳು ತಲುಪಲಿ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಭವನ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವಂತೆ ಆಗ್ರಹಿಸಿ ಹಾಗು ಗ್ರಾಮಸಭೆ ನಿರ್ಲಕ್ಷ್ಯ ಮತ್ತು ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಇರುವುದನ್ನು ಖಂಡಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಂಬೇಡ್ಕರ್ ಭವನ ಮುಂಭಾಗ ಹಗಲು-ರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
ಭದ್ರಾವತಿ : ನಗರದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಭವನ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವಂತೆ ಆಗ್ರಹಿಸಿ ಹಾಗು ಗ್ರಾಮಸಭೆ ನಿರ್ಲಕ್ಷ್ಯ ಮತ್ತು ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಇರುವುದನ್ನು ಖಂಡಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಂಬೇಡ್ಕರ್ ಭವನ ಮುಂಭಾಗ ಹಗಲು-ರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಆರಂಭಗೊಂಡಿದ್ದು, ಹಲವು ದಶಕಗಳ ನಿರಂತರ ಹೋರಾಟದ ಫಲವಾಗಿ ನಗರದ ಹೃದಯ ಭಾಗವಾದ ಕನಕಮಂಟಪ ಮೈದಾನದ ಬಳಿ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಪಕ್ಕದ ಖಾಲಿ ಜಾಗದಲ್ಲಿ ೨೦೧೮ರಲ್ಲಿ ಶಂಕುಸ್ಥಾಪನೆಗೊಂಡು ಇದೀಗ ಪೂರ್ಣ ಪ್ರಮಾಣಕ್ಕೆ ತಲುಪಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ನಾಡಿನ ಎಲ್ಲಾ ಧರ್ಮದ, ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ, ಬಡವರು, ಶೋಷಿತರ ಧ್ವನಿಯಾಗಿರುವ ಧೀಮಂತ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸುವ ಮೂಲಕ ಅಂಬೇಡ್ಕರ್ರವರನ್ನು ಗೌರವಿಸಬೇಕೆಂದು ಕೋರಲಾಯಿತು.
ತಾಲೂಕಿನ ಎಲ್ಲಾ ೩೩ ಗ್ರಾಮ ಪಂಚಾಯಿತಿಗಳಲ್ಲಿ ಸಮರ್ಪಕವಾಗಿ ಗ್ರಾಮಸಭೆಗಳನ್ನು ನಡೆಸುತ್ತಿಲ್ಲ. ಗ್ರಾಮಸಭೆಗಳ ಕುರಿತು ಗ್ರಾಮಸ್ಥರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಸರ್ಕಾರದ ಯೋಜನೆಗಳು ಬಡವರ್ಗದವರಿಗೆ ತಲುಪದೆ ಶ್ರೀಮಂತರ ಪಾಲಾಗುತ್ತಿವೆ. ಜಾತಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಸರಿಯಾಗಿ ಕಲ್ಪಿಸಿಕೊಡದೆ ನಿರ್ಲಕ್ಷ್ಯವಹಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಹ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಲ್ಲದೆ ಭ್ರಷ್ಟಾಚಾರ ಸಹ ಕಂಡು ಬರುತ್ತಿದ್ದು, ಈ ಕುರಿತು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಲಾಯಿತು.
ತಕ್ಷಣ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳುವ ಮೂಲಕ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಸಮರ್ಪಕವಾಗಿ ಗ್ರಾಮಸಭೆಗಳನ್ನು ನಡೆಸುವ ಮೂಲಕ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಿಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನಾ ಧರಣಿ ಸತ್ಯಾಗ್ರಹದಲ್ಲಿ ಐ.ಎಲ್ ಅರುಣ್ಕುಮಾರ್, ಎಂ.ಎನ್ ಚಂದ್ರಶೇಖರ್, ಎಲ್. ಸಂಗಮ್ಮ, ರತ್ನಮ್ಮ, ವರಲಕ್ಷ್ಮಿ, ಲಕ್ಷ್ಮಮ್ಮ, ಸರೋಜ, ಶಾರದಮ್ಮ, ಗಂಗಮ್ಮ, ಜಯಮ್ಮ, ನಾಗರತ್ನಮ್ಮ, ನವೀನ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.